ಅಕ್ಟೋಬರ್ 30: ೧೦ ವರ್ಷಗಳ ಸಕ್ರಿಯ ರಾಜಕಾರಣದಿಂದ ದೂರವಿದ್ದ ಮಾಜಿ ಸಚಿವ ಹಿರಿಯ ರಾಜಕಾರಣಿ ಪಿ.ಜಿ.ಆರ್. ಸಿಂಧ್ಯರವರು ಜೆ ಡಿ ಎಸ್ ಗೆ ಸೋಮವಾರ ಮರಳಿದ್ದಾರೆ . ಅವರಿಗೆ ಪ್ರತಿಷ್ಠಿತ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಆಹ್ವಾನ ಸಿಕ್ಕಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುತ್ತಿರುವ ಮೈಸೂರಿನ ವರುಣಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಪಿ.ಜಿ.ಆರ್. ಸಿಂಧ್ಯ ಕಣಕ್ಕಿಳಿಯುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಶಕ್ತಿ ಕುಗ್ಗಿಸಲು ಸಿದ್ಧತೆ ನಡೆಸಿರುವ ಜೆಡಿಎಸ್ ವರಿಷ್ಠರು ಸಿಂಧ್ಯ ಅವರನ್ನು ವರುಣಾದಲ್ಲಿ ಕಣಕ್ಕೆ ಇಳಿಸಲು ಚಿಂತನೆ ನಡೆಸಿದ್ದಾರೆ.
ಹಾಲಿ ಪ್ರತಿನಿಧಿಸುವ ವರುಣಾ ಕ್ಷೇತ್ರವನ್ನು ತಮ್ಮ ಪುತ್ರ ಡಾ. ಯತೀಂದ್ರ ಅವರಿಗೆ ಬಿಟ್ಟುಕೊಟ್ಟು, ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ.
ಭಾನುವಾರ ಸಂಜೆ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಸಿಂಧ್ಯ ಪಕ್ಷಕ್ಕೆ ಮರು ಸೇರ್ಪಡೆಯಾಗುವ ಕುರಿತು ಮಾತುಕತೆ ನಡೆಸಿದರು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಉಪಸ್ಥಿತರಿದ್ದರು.